ರಾಜ್ಯದಲ್ಲಿ ಮತ್ತೆ ಮಳೆ ತಾಂಡವ! ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ.. ರೆಡ್‌ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 31ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಈ ನಡುವೆ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಮುಂಜಾಗೃತಾ ಕ್ರಮವಾಗಿ ರಾಜ್ಯದ ದಕ್ಷಿಣ ಕನ್ನಡ ಮತ್ತು ಬೀದ‌ರ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮೊನ್ನೆಯಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಇಂದೂ ಕೂಡ ಈ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ (Karnataka Rain) ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸರ್ಕಾರಿ, ಅನುದಾನಿತ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಇಂದು (ಆಗಸ್ಟ್ 29) ರಜೆ ಘೋಷಿಸಿ (school holiday in karnataka) ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ ಆದೇಶ ಹೊರಡಿಸಿದ್ದಾರೆ. ಇನ್ನು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿದ ಮುನ್ಸೂಚನೆಯಂತೆ, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ.

Karnataka Rains On 29 August

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬೆಂಗಳೂರಿನ ಮೆಜೆಸ್ಟಿಕ್, ವಿಧಾನಸೌಧ, ಕೆಆ‌ರ್.ಮಾರುಕಟ್ಟೆ, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ಎಲೆಕ್ಟ್ರಾನಿಕ್ ಸಿಟಿ, ಮೈಸೂರು ರಸ್ತೆ, ಹೊಸಕೆರೆಹಳ್ಳಿ ನಾಯಂಡಹಳ್ಳಿ, ಆ‌ರ್.ಆ‌ರ್.ನಗರ, ಬಸವೇಶ್ವರನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಂದು ಕೂಡ ಇದೇ ರೀತಿಯ ಮಳೆ ನಿರೀಕ್ಷಿಸಲಾಗಿದೆ.

ಬೆಂಗಳೂರು ಸೇರಿ 22 ಜಿಲ್ಲೆಗಳಿಗೆ ಹೈ ಅಲರ್ಟ್

ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ನೀಡಲಾಗಿದೆ.

ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಭಾರೀ ಮಳೆ?

ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಮತ್ತು ಬೆಂಗಳೂರು ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

ಬೆಂಗಳೂರಿನಲ್ಲಿ ಒಂದು ವಾರ ಮಳೆ

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯ ತೀವ್ರತೆ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ರಾಜಧಾನಿಯಲ್ಲಿ ವಾರವಿಡೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಪ್ರತಿದಿನ ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ತಿಂಗಳ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ 31ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇದು ಸೆಪ್ಟೆಂಬರ್ 1ರವರೆಗೆ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

English summary

Karnataka Heavy Rain Alert: Schools and Colleges in Several Districts Are Closed Today. Details Here

Karnataka Heavy Rain Alert: Schools and Colleges in Several Districts Are Closed Today. Details Here
Story first published: Friday, August 29, 2025, 8:43 [IST]
X
Desktop Bottom Promotion