ವೃಕ್ಷಮಾತೆ ಇನ್ನಿಲ್ಲ.. ಕೊನೆಯುಸಿರೆಳೆದ ಸಾಲುಮರದ ತಿಮ್ಮಕ್ಕ! ಅವರಿಗೆ ಕಾಡಿದ ಸಮಸ್ಯೆ ಏನು? Saalumarada Thimmakka

ವೃಕ್ಷಮಾತೆ ಇನ್ನಿಲ್ಲ.. ಕೊನೆಯುಸಿರೆಳೆದ ಸಾಲುಮರದ ತಿಮ್ಮಕ್ಕ! ಹೌದು, ಪರಿಸರ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ (Saalumarada Thimmakka) ಅವರು 114ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನವೆಂಬರ್ 2 ರಿಂದ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ (Saalumarada Thimmakka Death) ಕೊನೆಯುಸಿರೆಳೆದಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರು 1911ರ ಜೂನ್ 30ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದರು. ನಂತರ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಮಕ್ಕಳಿಲ್ಲದ ಕಾರಣ, ದಂಪತಿಗಳು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಮಕ್ಕಳ ದುಃಖವನ್ನು ಮರೆತಿದ್ದರು.

Saalumarada Thimmakka Death

ರಾಜ್ಯ ಹೆದ್ದಾರಿ 99ರ ಕುದೂರಿನಿಂದ ಹುಲಿಕಲ್ ಮಾರ್ಗದ ನಡುವೆ ಸಾಲುಮರದ ತಿಮ್ಮಕ್ಕ ಅವರು ನೆಟ್ಟಿರುವ ಸಾವಿರಾರು ಮರಗಳು ಅವರ ಪರಿಸರ ಪ್ರೀತಿಯ ಪ್ರತೀಕವಾಗಿ ಇಂದಿಗೂ ನಿಂತಿವೆ. ಅವರ ಈ ಕಾರ್ಯ ಇಡೀ ದೇಶಕ್ಕೆ ಪ್ರೇರಣೆಯಾಗಿದೆ. ಪದ್ಮ ಪ್ರಶಸ್ತಿ ಪುರಸ್ಕೃತೆ ತಿಮ್ಮಕ್ಕ ಅವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಕೂಡ ಪಡೆದಿದ್ದರು. ವೃಕ್ಷಮಾತೆಯ ನಿಧನಕ್ಕೆ ಕರುನಾಡು ಕಂಬನಿ ಮಿಡಿದಿದೆ.

ಪರಿಸರ ಸೇವೆಗೆ ಸಂದ ಅನೇಕ ಪ್ರಶಸ್ತಿ

ಅನಕ್ಷರಸ್ಥೆಯಾಗಿದ್ದರೂ, ಪರಿಸರ ಸಂರಕ್ಷಣೆಗೆ ತಿಮ್ಮಕ್ಕ ನೀಡಿದ ಮಹತ್ತರ ಕೊಡುಗೆಗಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರನ್ನು 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್‌ನ ವಿಶಾಲಾಕ್ಷಿ ಪ್ರಶಸ್ತಿ, 2010ರ ಪ್ರತಿಷ್ಠಿತ 'ನಾಡೋಜ' ಪ್ರಶಸ್ತಿಯೂ ಇವರಿಗೆ ಸಂದಿದೆ. ಇದರ ಜೊತೆಗೆ, 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ತಿಮ್ಮಕ್ಕ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿತ್ತು. ಅವರ ಪರಿಸರ ಸೇವೆಗೆ ಸಂದ ಅನೇಕ ಪ್ರಶಸ್ತಿಗಳಲ್ಲಿ ಇವು ಪ್ರಮುಖವಾಗಿವೆ.

ಸಿಎಂ ಸಿದ್ದರಾಮಯ್ಯ ಸಾಂತಾಪ

ತಿಮ್ಮಕ್ಕನವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಸಂತಾಪ ವ್ಯಕ್ತಪಡಿಸಿದ್ದಾರೆ. ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು.

ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ವಿಪಕ್ಷ ನಾಯಕ ಅಶೋಕ್ ಸಂತಾಪ

ತಿಮ್ಮಕ್ಕನವರ ನಿಧನಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ರಸ್ತೆ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು 'ಮರಗಳೇ ನನ್ನ ಮಕ್ಕಳು' ಎಂದು ಘೋಷಿಸಿದ ವೃಕ್ಷಮಾತೆ, ನಮ್ಮ ಹೆಮ್ಮೆಯ ಪದ್ಮಶ್ರೀ ಪುರಸ್ಕೃತರಾದ ಡಾ. ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ" ಎಂದು ಅಶೋಕ್ ಟ್ವೀಟ್ ಮಾಡಿದ್ದಾರೆ.

ಅವರು ಮತ್ತಷ್ಟು ಬರೆದು, "ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಪರಿಸರ ಸೇವೆಯನ್ನೇ ಮಾದರಿಯಾಗಿಸಿಕೊಂಡು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉಳಿಸಿ, ಬೆಳೆಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ" ಎಂದು ಸಾರ್ವಜನಿಕರಿಗೆ ಕರೆ ನೀಡಿದರು. ಇದು ಅವರ ಪರಿಸರ ಪ್ರೇಮಕ್ಕೆ ಸಲ್ಲಿಸುವ ಅಂತಿಮ ಗೌರವ ಎಂದು ಅಶೋಕ್ ತಿಳಿಸಿದ್ದಾರೆ.

ಆಲದ ಸಸಿಗಳನ್ನು ನೆಟ್ಟು, ಮಕ್ಕಳಂತೆ ಪೋಷಣೆ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ಉಸಿರಾಟದ ಸಮಸ್ಯೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಧ್ಯಾಹ್ನ 12 ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾದ ತಿಮ್ಮಕ್ಕ, 1911ರ ಜೂನ್ 30ರಂದು ಜನಿಸಿದ್ದರು. ಇವರು ಹುಲಿಕಲ್ ಗ್ರಾಮದ ಚಿಕ್ಕಯ್ಯ ಅವರನ್ನು ವಿವಾಹವಾಗಿದ್ದರು. ಮಕ್ಕಳಿಲ್ಲದ ಕೊರಗನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು, ಅವುಗಳನ್ನೇ ತಮ್ಮ ಮಕ್ಕಳಂತೆ ಪೋಷಿಸಿ, ಸಾಲುಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾದರು.

English summary

Saalumarada Thimmakka Death; Padma Shri Saalumarada Thimmakka passes away at 114

Saalumarada Thimmakka Death; Indian environmentalist Padma Shri Saalumarada Thimmakka passes away at 114
X
Desktop Bottom Promotion