ರಾಜ್ಯ ಬಜೆಟ್: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ..! ಏನೆಲ್ಲಾ ಸಿಕ್ಕಿದೆ ನೋಡಿ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ ಬರೋಬ್ಬರಿ 15ನೇ ಬಜೆಟ್ ಇದಾಗಿದೆ. ಅವರ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬರಪೂರ ಕೊಡುಗೆಗೆಳ ನೀಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆ ಸೇರಿದಂತೆ ತಾಲೂಕು ಮಟ್ಟದಲ್ಲೂ ಆಸ್ಪತ್ರೆ ಹಾಗೂ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ.

ಹಾಗಾದರೆ ಆರೋಗ್ಯ ಕ್ಷೇತ್ರಕ್ಕೆ ಈ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಯಾವೆಲ್ಲಾ ಯೋಜನೆ ಘೋಷಣೆ ಮಾಡಲಾಗಿದೆ ಎಂಬುದನ್ನು ತಿಳಿದುಕೊಳ್ಳೋಣ.

State Budget 2024


ಜಿಲ್ಲೆಗಳಲ್ಲಿಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳ ನಿರ್ಮಾಣ

ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‌ಗಳ ಸ್ಥಾಪಿಸಲಾಗುವುದು ಎಂದಿದ್ದಾರೆ.

ಕ್ಯಾನ್ಸರ್‌ ಚಿಕಿತ್ಸೆಗೆ ಕೀಮೋಥೆರಪಿ ಕೇಂದ್ರ

ಇತ್ತೀಚಿಗೆ ಕ್ಯಾನ್ಸರ್ ಕಾಯಿಲೆ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಕ್ಯಾನ್ಸರ್ ಚಿಕಿತ್ಸೆಯಾದ ಕೀಮೋಥೆರಪಿಗೆ ಬಹಳಷ್ಟು ಹಣ ಮತ್ತು ಉತ್ತಮ ಕೇಂದ್ರಗಳ ಅಗತ್ಯವಿದೆ. ಹೀಗಾಗಿ ಬಜೆಟ್‌ನಲ್ಲಿ ಬಹುತೇಕ ಜಿಲ್ಲೆಗಳಲ್ಲಿ 20 ಕೋಟಿ ವೆಚ್ಚದಲ್ಲಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರಗಳ ನಿರ್ಮಾಣಕ್ಕೆ ಮುಂದಾಗಲಾಗುವುದು ಎಂದಿದ್ದಾರೆ.

ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.


2025ರ ಒಳಗೆ ಕ್ಷಯರೋಗ ನಿರ್ಮೂಲನೆಯ ಮಂತ್ರ

2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 True-Nat Machines ಗಳನ್ನು ಖರೀದಿಸಲು 6 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಕ್ಷಯರೋಗವು ಮೈಕೋಬ್ಯಾಕ್ಟೀರಿಯಮ್‌ ಟ್ಯುಬರ್ಕ್ಯುಲೋಸಿಸ್ ಎಂದು ಕರೆಯಲಾಗುವ ಬ್ಯಾಕ್ಟಿರಿಯಾದಿಂದ ಉಂಟಾಗುತ್ತದೆ.


16 ಜಿಲ್ಲೆಯಲ್ಲಿ IPHL ಕೇಂದ್ರ ಸ್ಥಾಪನೆ

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡುವ ಉದ್ದೇಶದಿಂದ ಪ್ರಸಕ್ತ ವರ್ಷದಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲಾಸ್ಪತ್ರೆಗಳಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು ಎಂದಿದ್ದಾರೆ. ಇದರ ಜೊತೆ 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಈ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದು ಘೋಷಿಸಲಾಗಿದೆ.

ಇದರ ಜೊತೆ ಈ ಹಣಕಾಸು ವರ್ಷದಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದಿದ್ದಾರೆ.

English summary

State Budget: Top Announcements For Healthcare Sector In Kannada

Chief Minister Siddaramaiah today presented the state budget for the year 2024-25. He announced Several Policies health sector. Here Are Top Announcements For Healthcare Sector.
Story first published: Friday, February 16, 2024, 13:00 [IST]
X
Desktop Bottom Promotion